ನಿಲಯ ಮೇಲ್ವಿಚಾರಕಿ ಕರ್ತವ್ಯದಿಂದ ಬಿಡುಗಡೆಗೆ ; ಆಯೋಗದ ಅಧ್ಯಕ್ಷರ ಸೂಚನೆ

ತುಮಕೂರು : ಕರ್ತವ್ಯ ನಿರ್ಲಕ್ಷ್ಯದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಆಹಾರ ಆಯೋಗ ಅಧ್ಯಕ್ಷ ಡಾ. ಕೃಷ್ಣ ಅವರ ಆದೇಶದ ಮೇರೆಗೆ ತಿಪಟೂರಿನ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿನಿಲಯದ ನಿಲಯಪಾಲಕರಾದ ಪ್ರಮೀಳ ಕೆ.ಎನ್. ರವರನ್ನು ಕರ್ತವ್ಯದಿಂದ ಬಿಡುಗಡೆ ಮಾಡಲಾಗಿದೆ.

ತಿಪಟೂರಿನ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಕರ್ನಾಟಕ ರಾಜ್ಯ ಆಹಾರ ಆಯೋಗ ಅಧ್ಯಕ್ಷ ಡಾ. ಕೃಷ್ಣ ಅವರು ಭೇಟಿ ನೀಡಿದ ಸಂದರ್ಭದಲ್ಲಿ ಆಹಾರ ಪದಾರ್ಥಗಳ ದಾಸ್ತಾನಿನಲ್ಲಿ ವ್ಯತ್ಯಾಸ ಕಂಡು ಬಂದ ಹಿನ್ನೆಲೆಯಲ್ಲಿ ನಿಲಯಪಾಲಕರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸುವಂತೆ ಆದೇಶಿಸಿದ್ದರು. ಈ ಹಿನ್ನೆಲೆಯಲ್ಲಿ ನಿಲಯಪಾಲಕರಾದ ಪ್ರಮೀಳ ಕೆ.ಎನ್.ರವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

ಈ ವಿದ್ಯಾರ್ಥಿನಿಲಯದ ನಿರ್ವಹಣೆಯ ಪ್ರಭಾರವನ್ನು ನಿಲಯ ಮೇಲ್ವಿಚಾರಕರಾದ ಶೋಭರವರಿಗೆ ವಹಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.